
ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ- ಶಿಸ್ತು ಕ್ರಮಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಸಂಬಂಧಪಟ್ಟವರ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಅಧೀನ ವೈದ್ಯರು, ವೈದ್ಯಾಧಿಕಾರಿಗಳು, ಶುಶ್ರೂಷಕರು ಹಾಗೂ ಸಿಬ್ಬಂದಿಗಳ ಸೇವಾ ವಿಷಯದಲ್ಲಿ ವ್ಯಾಪಕ ಭ್ರಷ್ಟಾಚಾರವೆಸಗುತ್ತಿರುವ ಬಗ್ಗೆ ಮೌಖಿಕ ದೂರುಗಳು ಬರುತ್ತಿವೆ. ಬಿಲ್ ಪಾವತಿ, ಟೆಂಡರ್ ಮತ್ತಿತರ ವಿಷಯಗಳಲ್ಲೂ ನಿಯಮ ಮೀರಿ ಭ್ರಷ್ಟಾಚಾರ ಎಸಗುತ್ತಿರುವ ಬಗ್ಗೆ ಆರೋಪಗಳಿವೆ.
ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರಾದ ಡಾ. ಪಿ. ವಿ. ಭಂಡಾರಿಯರವರು ಆ ಕಚೇರಿಯಲ್ಲಿ ಕೆಲವರು ಎನ್ ಆರ್ ಎಚ್ ಎಮ್ ವೈದ್ಯರು ಮತ್ತು ದಾದಿಯರಿಂದ ಹಣ ಕೇಳುತ್ತಿದ್ದಾರೆ. ಹಾಗೆಯೇ ತಮ್ಮ ಸಂಸ್ಥೆಯ ಟೆಂಡರ್ ಒಂದರ ಬಗ್ಗೆ ಕೂಡ ಅಹಿತಕರ ಅನುಭವವಾಗಿತ್ತು ಎಂದು ಪತ್ರ ಬರೆದಿದ್ದರು. ಹಾಗೂ ಅದನ್ನು ತಾವು ಕಾನೂನಾತ್ಮಕವಾಗಿಯೇ ಹ್ಯಾಂಡಲ್ ಮಾಡುತ್ತೇನೆ ಎಂದೂ ಪತ್ರದಲ್ಲಿ ತಿಳಿಸಿದ್ದರು.
ಆರೋಗ್ಯ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಉತ್ತಮ ಸೇವೆಗೆ ಹೆಸರು ಮಾಡಿದ ಉಡುಪಿಯಂತಹ ಮುಂದುವರೆದ ಜಿಲ್ಲೆಯಲ್ಲಿ ಈ ರೀತಿಯ ಕಾರ್ಯ ವೈಖರಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ವರ್ಗಾವಣೆಗೆ ಕ್ರಮ ಕೈಗೊಂಡು, ಇವರ ಕರ್ತವ್ಯದ ಅವಧಿಯಲ್ಲಿ ಕೈಗೊಂಡ ತೀರ್ಮಾನಗಳು ಮತ್ತು ವಿಲೇಗೊಳಿಸಿದ ಕಡತಗಳ ಬಗ್ಗೆ ತನಿಖೆ ನಡೆಸಿ, ಸೂಕ್ತ ಶಿಸ್ತು ಕ್ರಮಕೈಗೊಳ್ಳುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ.