
ಕೋಟೇಶ್ವರ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ನಿಧನ
25/08/2025 03:33 AM
ಕೋಟೇಶ್ವರ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರ ಸಮೀಪದ ಕೋಟೇಶ್ವರ ಸರ್ಜನ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ‘ಆ ದಿನಗಳು’, ‘ಕೆಜಿಎಫ್’ ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಅವರಿಗೆ ಸ್ಟ್ರೋಕ್ ಆಗಿತ್ತು.ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಊರಿಗೆ ಮರಳಿದ್ದರು.ಮತ್ತೆ ಅಸ್ವಸ್ಥಗೊಂಡು ಕೋಟೇಶ್ವರದ ಸರ್ಜನ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.