
ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತೋನ್ಸೆ ಜಯಕೃಷ್ಣ ಶೆಟ್ಟಿ ಖಂಡನೆ
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಕಠಿನ ಕ್ರಮ ಕೈಗೊಳ್ಳುವಂತೆ ಸರಕಾರೇತರ ಸಂಸ್ಥೆ ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಆಗ್ರಹಿಸಿದ್ದಾರೆ.
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರವು ಬಹು ಧರ್ಮೀಯ ಸಾಂಸ್ಕೃತಿಕ ಕೇಂದ್ರವೂ ಹೌದು. ಹಿಂದೂಗಳು ಶ್ರೀಕ್ಷೇತ್ರದ ಬಗ್ಗೆ ಅಪಾರ ಭಕ್ತಿ-ಭಾವನೆ ಹೊಂದಿದ್ದು, ಇಲ್ಲಿನ ಧರ್ಮಾಧಿಕಾರಿಗಳ ಬಗ್ಗೆ ಅಪ ಪ್ರಚಾರ ನಡೆಸುತ್ತಿರುವುದು ಖಂಡ ನೀಯ ಎಂದು ಅವರು ತಿಳಿಸಿದ್ದಾರೆ.
ಧರ್ಮಾಧಿಕಾರಿ ಪದ್ಮವಿಭೂಷಣ ರಾಜಶ್ರೀ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಗ್ರಾಮಾಭಿವೃದ್ಧಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಮಾಜಮುಖಿ ಯೋಜನೆಗಳಿಂದ ಹೆಸರುವಾಸಿಯಾಗಿದ್ದಾರೆ.
ಲಕ್ಷಾಂತರ ಭಕ್ತರು ಪ್ರತೀದಿನ ಭೇಟಿ ನೀಡುವ ಪವಿತ್ರ ಸ್ಥಳ ಶ್ರೀಕ್ಷೇತ್ರದಿಂದ ಜನಸಾಮಾನ್ಯರಿಗೆ ಪ್ರಯೋಜನಕಾರಿ ಯಾಗುವ ಹಲವಾರು ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ಸನಾತನ ಧರ್ಮಕ್ಕೆ ಹಿಂದೂ ಸಂಸ್ಕೃತಿಗೆ ಹಾಗೂ ಧಾರ್ಮಿಕ ಸಹಿಷ್ಣುತೆಗೆ ಅಪಾಯಕಾರಿಯಾಗಿದೆ.
ಪ್ರಜ್ಞಾವಂತ ನಾಗರಿಕರೆಲ್ಲರೂ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗೆ ನಿಲ್ಲಬೇಕು. ಆ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸತ್ಯದ ಬೆಳಕು ಪಸರುವಂತೆ ಮಾಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.