
ಶಿರ್ವ: ಮಗು ಮಾರಾಟ- ವೈದ್ಯ ಸೇರಿ ಮೂವರ ಬಂಧನ
ಶಿರ್ವ: ಅತ್ಯಾಚಾರ ಸಂತ್ರಸ್ತೆ ಶಿಶು ಮಾರಾಟ ಮಾಡಿದ್ದ ಪ್ರಕರಣ ಸಂಬಂಧಿಸಿ ವೈದ್ಯ ಸೋಮೇಶ್ ಸೊಲೊಮನ್ ಸೇರಿ ಮೂವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ. ವಿಚಾರಿಸಿದಾಗ, ಮಂಗಳೂರಿನ ನೀಡಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ.
ಈ ಸಂಬಂಧ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ಮಂಗಳೂರಿನ ಕೊಲಾಸೊ ಆಸ್ಪತ್ರೆಯ ವೈದ್ಯರಿಗೆ 4.5 ಲಕ್ಷ ರೂ. ಹಣ ನೀಡಿ ಶಿಶು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಮಗು ಅತ್ಯಾಚಾರ ಸಂತ್ರಸ್ತೆಯದ್ದು ಎಂದು ಗೊತ್ತಾಗಿದ್ದು, ಆರೋಪಿ ನವನೀತ್ ನಾರಾಯಣ ಮತ್ತು ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮೀ ಅಲಿಯಾಸ್ ವಿಜಯ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.