
ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಸೆ.18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಅವರು ತಿಮರೋಡಿಯವರನ್ನು ಗಡಿಪಾರು ಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿಯವರು ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ವಿಚಾರಣೆಯನ್ನು ಆಲಿಸಿದ ನ್ಯಾಯಪೀಠ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿದೆ.ಜೊತೆಗೆ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.
ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದರು.