ಬೆಂಗಳೂರು: ಸಿಎಂ ಡಿಸಿಎಂ ಜಂಟಿ ಸುದ್ದಿಗೋಷ್ಠಿ "ನಮ್ಮಿಬ್ಬರಲ್ಲಿ ಯಾವುದೇ ಗೊಂದಲ ಇಲ್ಲ" - ಸಿಎಂ-ಡಿಸಿಎಂ ಸ್ಪಷ್ಟನೆ

ಜಂಟಿ ಸುದ್ದಿಗೋಷ್ಟಿ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ತಮ್ಮ ನಡುವೆ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಿರ್ದೇಶನದಂತೆ ನಾವಿಬ್ಬರೂ 'ಬ್ರೇಕ್ ಫಾಸ್ಟ್ ಮೀಟಿಂಗ್' ನಡೆಸಿದ್ದೇವೆ ಎಂದು ಸಿಎಂ ತಿಳಿಸಿದರು.

"ನಮ್ಮಿಬ್ಬರಲ್ಲಿ ಯಾವುದೇ ಗೊಂದಲ ಇಲ್ಲ," "ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ,' ಎಂದರು. ಅಲ್ಲದೆ, ಈ ಎಲ್ಲಾ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಸಿಎಂ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, " ಹೈಕಮಾಂಡ್ ಹೇಳಿದಂತೆ ನಡೆದುಕೊಂಡು ಹೋಗುತ್ತಿದ್ದೇವೆ. ನಮ್ಮಿಬ್ಬರದೂ ಕೂಡ ಒಂದೇ ತೀರ್ಮಾನ. ನಮ್ಮದು ಯಾವ ಗುಂಪೂ ಇಲ್ಲ," ಎಂದು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ಅಧಿಕಾರ ಹಸ್ತಾಂತರದ ಬಗ್ಗೆ ನಾನು ಇಂದು ಒಂದೇ ಒಂದು ಶಬ್ದವೂ ಮಾತನಾಡಿಲ್ಲ," ಎಂದು ಅವರು ಒತ್ತಿ ಹೇಳಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೆರಡು ದಿನಗಳಲ್ಲಿ ತಮ್ಮ ಮನೆಗೆ ಉಪಹಾರಕ್ಕೆ ಆಗಮಿಸಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.