ಮಂಗಳೂರು: ಸಿಎಂ ಭೇಟಿ ವೇಳೆ ಡಿಕೆಶಿ ಮತ್ತು ಸಿಎಂ ಪರ ಘೋಷಣೆ ಕೂಗಿದ ಕಾರ್ಯಕರ್ತರು



ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಡಿ ಕೆ ಶಿವಕುಮಾರ್ ಪರ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು.

ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಐತಿಹಾಸಿಕ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದದ ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ವೇಣುಗೋಪಾಲ್ ಟರ್ಮಿನಲ್‌ನಿಂದ ನಿರ್ಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರ ಗುಂಪೊಂದು ಶಿವಕುಮಾರ್‌ಗೆ ಬೆಂಬಲ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿತು.ಸಿದ್ದರಾಮಯ್ಯ ಇಲ್ಲಿಗೆ ಬಂದ ನಂತರ, ಅವರ ಬೆಂಬಲಿಗರು 'ಸಿದ್ದು, ಸಿದ್ದು, ಪೂರ್ಣಾವಧಿ ಸಿದ್ದು' (ಪೂರ್ಣಾವಧಿ ಸಿಎಂ ಸಿದ್ದರಾಮಯ್ಯ) ಎಂಬ ಘೋಷಣೆಗಳೊಂದಿಗೆ ಪ್ರತಿ ಘೋಷಣೆ ಕೂಗಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಪರ ಗುಂಪಿನ ನಾಯಕ ಮಿಥುನ್ ರೈ, ಪಕ್ಷದೊಳಗೆ ನಾಯಕರ ಮಧ್ಯೆ ಯಾವುದೇ ಪೈಪೋಟಿ ಇಲ್ಲ. ಆದರೆ ಅನೇಕ ಕಾರ್ಯಕರ್ತರು "ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ನೋಡಲು ಸಂತೋಷಪಡುತ್ತಾರೆ" ಎಂದು ಒಪ್ಪಿಕೊಂಡರು.

ಈ ಘೋಷಣೆ ಕೂಗುವಿಕೆಯು ತಳಮಟ್ಟದ ಕಾರ್ಯಕರ್ತರಲ್ಲಿ ಉಪಮುಖ್ಯಮಂತ್ರಿಗಳಿಗೆ "ಸಹಜ ಪ್ರೀತಿ"ಯ ಅಭಿವ್ಯಕ್ತಿಯಾಗಿದೆ ಎಂದು ಅವರು ಬಣ್ಣಿಸಿದರು.