ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ
5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೇಶ್ವರದಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಶಾಸಕ ಮತ್ತು ಇಬ್ಬರು ಪಿಎಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ಕ್ಲಾಸ್ 1 ಗುತ್ತಿಗೆದಾರ ವಿಜಯ್ಗೆ ಲಂಚ ನೀಡಲು ಒತ್ತಾಯಿಸಲಾಗಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣದ ಕಾಮಗಾರಿ ವಹಿಸಲು 11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಆದರೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಶಾಸಕ ಚಂದ್ರು ಮತ್ತು ಇಬ್ಬರು ಪಿಎಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ಮಾಡಿದೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.
ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ: ಮಂಜುನಾಥ್
ಸದ್ಯ ಈ ವಿಚಾರವಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿಕೆ ನೀಡಿದ್ದು, ಶಾಸಕರೇ ಈ ರೀತಿಯ ಕೆಲಸಕ್ಕೆ ಇಳಿಯಬಾರದು. ನಾವು ಮಾಡುತ್ತಿದ್ದ ಕಮಿಷನ್ ಆರೋಪಕ್ಕೆ ಸಾಕ್ಷಿ ಸಿಕ್ಕಂತೆ ಆಗಿದೆ. ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ. ದೂರುದಾರ ಗುತ್ತಿಗೆದಾರನ ಬೆಂಬಲಕ್ಕೆ ನಮ್ಮ ಸಂಘ ಇರಲಿದೆ ಎಂದು ಹೇಳಿದ್ದಾರೆ.
ನನ್ನ ಗಮನಕ್ಕೆ ಬಂದಿಲ್ಲ: ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನಮ್ಮ ಪಕ್ಷ ಎಂದೂ ಸಹ ಲಂಚ ಸ್ವೀಕಾರ ಮಾಡಿ ಅಂತ ಹೇಳಿಲ್ಲ. ಇದರ ಹಿಂದೆ ಸತ್ಯಾಸತ್ಯತೆ ಏನಿದೆ ಅಂತಾ ಪರಿಶೀಲನೆ ಮಾಡಬೇಕಿದೆ ಎಂದಿದ್ದಾರೆ.