ಉಡುಪಿ: ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಮಗುಚಿಬಿದ್ದು, ಗ್ಯಾಸ್ ಸೋರಿಕೆ (ಲೀಕೇಜ್) ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ತೊಡಗಿದರು. ಸುಮಾರು 16 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆದಿದ್ದು, ಮಧ್ಯರಾತ್ರಿ ಸುಮಾರು 1 ಗಂಟೆಯ ವೇಳೆಗೆ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿತು.
ಮಂಗಳೂರಿನಿಂದ ತರಿಸಲಾದ ಭಾರತ್ ಗ್ಯಾಸ್ನ ಎರಡು ಟ್ಯಾಂಕರ್ಗಳ ಸಹಾಯದಿಂದ ಮಗುಚಿಬಿದ್ದ ಟ್ಯಾಂಕರ್ನಲ್ಲಿದ್ದ ಎಲ್ಪಿಜಿಯನ್ನು ಮತ್ತೊಂದು ಟ್ಯಾಂಕರ್ಗಳಿಗೆ ಸುರಕ್ಷಿತವಾಗಿ ವರ್ಗಾವಣೆ ಮಾಡಲಾಯಿತು.
ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಸಂಚಾರ ಆರಂಭಗೊಂಡಿದೆ. ಅಧಿಕಾರಿಗಳ ಸಕಾಲಿಕ ಹಾಗೂ ಸಮನ್ವಯದ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
