ಉಡುಪಿ: ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ : ಆರೋಪಿಗಳಿಗೆ ಜೀವಾವಧಿ ಶಿಕ್ಷೆ



ಉಡುಪಿ: ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಉಡುಪಿಯ ಮಂಚಿ ಕುಮೇರಿ ನಿವಾಸಿ ರಮಾನಾಥ ರೈ ಅವರು ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದರು. 18/02/2022 ರಂದು ಅವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವರ ಪತ್ನಿ ಸುಮತಿ ಮಾತ್ರ ಇದ್ದರು.

ಸಂಜೆ ಸುಮಾರಿಗೆ ಸುಮತಿಯವರ ಸಂಬಂಧಿ ಮಿಥುನ್ ಹಾಗೂ ಆತನ ಸ್ನೇಹಿತ ನಾಗೇಶ್ ಮನೆಗೆ ಬಂದು, ಪರಿಚಿತರಾಗಿದ್ದರಿಂದ ಸುಮತಿಯವರು ಬಾಗಿಲು ತೆರೆದಿದ್ದಾರೆ. ಮನೆಗೆ ಒಳನುಗ್ಗಿದ ಇಬ್ಬರು ಆರೋಪಿಗಳು ಸುಮತಿಯವರನ್ನು ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಯನ್ನು ಹಿಸುಕಿದ್ದಾರೆ. ಪರಿಣಾಮವಾಗಿ ಸುಮತಿ ಪ್ರಜ್ಞಾಹೀನರಾಗಿದ್ದಾರೆ.

ನಂತರ ಆರೋಪಿಗಳು ಅವರನ್ನು ಚೀಲದಲ್ಲಿ ಹಾಕಿ ಸೂಟ್‌ಕೇಸ್‌ನಲ್ಲಿ ತುಂಬಿಸಿ ಸ್ಥಳಾಂತರ ಮಾಡಲು ಯತ್ನಿಸುತ್ತಿದ್ದಾಗ, ರಮಾನಾಥ ರೈ ಹಾಗೂ ನೆರೆಹೊರೆಯವರು ಬಾಗಿಲು ತಟ್ಟಿದ ಹಿನ್ನೆಲೆಯಲ್ಲಿ ಆರೋಪಿಗಳು ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಂತರ ಸೂಟ್‌ಕೇಸ್ ತೆರೆದು ನೋಡಿದಾಗ ಸುಮತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಒಂದು ವಾರ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಅವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ, ಜೀವಾವಧಿ ಶಿಕ್ಷೆ ಹಾಗೂ ತಲಾ ₹20,000 ದಂಡ

ಕಲಂ 325ರಡಿ – 5 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಇದಲ್ಲದೆ, ವಸೂಲಾದ ದಂಡದಲ್ಲಿ ₹45,000ವನ್ನು ಗಾಯಾಳು ಸುಮತಿಯವರಿಗೆ ಪರಿಹಾರವಾಗಿ ನೀಡಲು ನ್ಯಾಯಾಲಯ ಆದೇಶಿಸಿದೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜಯರಾಮ ಶೆಟ್ಟಿ ವಾದ ಮಂಡಿಸಿದರು.