ನಾರಿ ಶಕ್ತಿ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಿದ ಬಿಜೆಪಿ: ಕೃಪಾ ಆಳ್ವ ಆರೋಪ



ಉಡುಪಿ: "ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನ‌ರ್ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು. 

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರಕಾರ 2023ರಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಕಾನೂನನ್ನು ಯಾಕೆ ಜಾರಿಗೊಳಿಸಿಲ್ಲ. ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು. ಮಣಿಪುರದಲ್ಲಿ ಮಹಿಳೆಯರ ಮೇಲಿನ ಹಿಂಸೆ, ಬೆಲೆ ಏರಿಕೆ, ಎಲ್ ಪಿಜಿ ದರ ಹೆಚ್ಚಳ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ, ಮತದಾರರ ಪಟ್ಟಿಯಿಂದ ಮಹಿಳೆಯರ ಹೆಸರು ಡಿಲೀಟ್ ಆಗುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳಿದ್ದು ಇವುಗಳ ಕುರಿತು ನರೇಂದ್ರ ಮೋದಿಯವುರು ಮೌನ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯಥಾಸ್ಥಿತಿಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ ಜಾರಿಗೊಳಿಸಿದರೆ ದಕ್ಷಿಣ ರಾಜ್ಯಗಳ ಪ್ರತಿನಿಧಿತ್ವ ಕಡಿಮೆಯಾಗುವ ಸಾಧ್ಯತೆ ಇದೆ. 2011ರ ಜನಗಣತಿ ಆಧಾರದಲ್ಲಿ ಕ್ಷೇತ್ರ ಪುನ‌ರ್ ವಿಂಗಡಣೆ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಿಯಲ್ಲ ಎಂದು ಹೇಳಿದರು.

60ಕ್ಕೂ ಹೆಚ್ಚು ಮಹಿಳಾ ಸಂಘಟನೆಗಳು ಕೇಂದ್ರ ಸರಕಾರದ ಈ ಕ್ರಮವನ್ನು ವಿರೋಧಿಸಿವೆ. ಸರ್ಕಾರ ಪಾರದರ್ಶಕತೆ ತೋರಬೇಕು ಹಾಗೂ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು. 2023ರ ಮಹಿಳಾ ಮೀಸಲಾತಿ ಕಾನೂನನ್ನು ಯಾವುದೇ ಷರತ್ತಿಲ್ಲದೆ ತಕ್ಷಣ ಜಾರಿಗೆ ತರಬೇಕು. ಆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರಾರದ ವೆರೋನಿಕಾ ಕಾರ್ನೆಲಿಯೊ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಡಾ ಸುನೀತಾ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಹ ಸಂಚಾಲಕರಾದ ರೋಶನಿ ಒಲಿವರ್ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿತಾ ಡಿಸೋಜ,ಶಾಲೆಟ್ ಪಿಂಟೋ ಉಪಸ್ಥಿತರಿದ್ದರು.