ಉಡುಪಿ: ಇಂದು ನೀಟ್ ಮರುಪರೀಕ್ಷೆ: ಜಿಲ್ಲೆಯಲ್ಲಿ 2970 ವಿದ್ಯಾರ್ಥಿಗಳಿಂದ ಹೆಸರು ನೋಂದಣಿ- 6 ಕೇಂದ್ರಗಳಲ್ಲಿ ಪರೀಕ್ಷೆ

 


ಉಡುಪಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಇಂದು (ಜೂನ್ 21) ದೇಶಾದ್ಯಂತ ನಡೆಯುವ ನೀಟ್‌ (ಯುಜಿ) ಮರು ಪರೀಕ್ಷೆ ಉಡುಪಿ ಜಿಲ್ಲೆಯ ಆರು ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟಾರೆಯಾಗಿ 2970 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಹೆಸರು ನೋಂದಾವಣೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.


ಜೂನ್ 21ರ ರವಿವಾರ ನಡೆಯುವ ನೀಟ್ ಮರುಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳುಂಟಾಗದಂತೆ ಹಾಗೂ ಪರೀಕ್ಷೆ ಪಾರದರ್ಶಕವಾಗಿ ನಡೆಯಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಸ್ವರೂಪ ಟಿ.ಕೆ. ಅವರು ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ-ಎನ್‌ಟಿಎ) ವತಿಯಿಂದ ನಡೆಯುವ ನೀಟ್ ಮರು ಪರೀಕ್ಷೆ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ 938 ಬಾಲಕರು, 2032 ಬಾಲಕಿಯರು, 7 ಪಿಡಬ್ಲ್ಯೂ ಬಿ.ಡಿ ಅಭ್ಯರ್ಥಿಗಳು ಹಾಗೂ 1 ಸ್ಟೈಬ್ ಸೌಲಭ್ಯ ಪಡೆದಿರುವ ಅಭ್ಯರ್ಥಿಗಳು ಸೇರಿದಂತೆ ಒಟ್ಟು 2970 ವೈದ್ಯಕೀಯ ಪದವಿ (ಎಂಬಿಬಿಎಸ್) ಕಲಿಯುವ ಆಸಕ್ತ ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅವರು ವಿವರಿಸಿದರು.


ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಪರೀಕ್ಷಾ ಕಾರ್ಯ ನಡೆಸಬೇಕು. ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯಲು ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು ಎಂದು ಅವರು ಸೂಚನೆ ನೀಡಿದರು.


ನೀಟ್ ಮರು ಪರೀಕ್ಷೆ ಜೂನ್ 21ರಂದು ಅಪರಾಹ್ನ 2ರಿಂದ ಸಂಜೆ 5:15ರವರೆಗೆ ನಡೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ಇರಲಿದೆ ಎಂದು ಅವರು ವಿವರಿಸಿದರು.


ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ವಿದ್ಯಾರ್ಥಿಗಳ ಪರಿಶೋಧನೆ ಕಾರ್ಯ ವನ್ನು ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕು. ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಗಳು, ಕ್ಯಾಲ್ಕುಲೇಟರ್, ಬ್ಲೂಟೂತ್ ಡಿವೈಸ್, ಇಯ‌ರ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಗಳು ಮತ್ತು ವಾಲೆಟ್ಸ್, ಹ್ಯಾಂಡ್‌ಬ್ಯಾಗ್‌ ತರುವುದನ್ನು ನಿಷೇಧಿಸಲಾಗಿದೆ ಎಂದ ಅವರು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು ಎಂದರು.


ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಮೂಲ (ಒರಿಜಿನಲ್) ಗುರುತಿನ ಚೀಟಿಯೊಂದಿಗೆ (ಕಾಲೇಜಿನ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಆಧಾ‌ರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ದಾಖಲೆಗಳ ಮೂಲಪ್ರತಿ) ಸೂಚನೆಯಲ್ಲಿ ತಿಳಿಸಿರುವಂತೆ 2 ಭಾವಚಿತ್ರಗಳೊಂದಿಗೆ ಪರೀಕ್ಷೆಗೆ ಹಾಜರಾಗಬೇಕು ಎಂದರು.


ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಭ್ಯರ್ಥಿ ಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಪ್ರಶ್ನೆಪತ್ರಿಕೆ ತರಿಸಿಕೊಳ್ಳಲು, ಉತ್ತರ ಪತ್ರಿಕೆ ರವಾನೆಗೆ ಅನುಕೂಲ ವಾಗುವಂತೆ ವಾಹನವನ್ನು ಸಿದ್ಧವಾಗಿಟ್ಟು ಕೊಳ್ಳಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.