ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಆಧಾರರಹಿತ : ಪ್ರಮೋದ್ ಮದ್ವರಾಜ್ ಸ್ಪಷ್ಟನೆ

 


ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಹರಿದಾಡುತ್ತಿರುವ ಕೆಲವು ಸುದ್ದಿಗಳು ಮತ್ತು ಊಹಾಪೋಹಗಳು ನನ್ನ ಗಮನಕ್ಕೆ ಬಂದಿವೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಸ್ಪಷ್ಟಪಡಿಸಿದ್ದಾರೆ.

ನಾನು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ, ಜನಸೇವೆಯ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ಆದರೆ ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ಕರಾವಳಿ ಕರ್ನಾಟಕದ ಅಭಿವೃದ್ಧಿಯಾಗಿದೆ.

ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ; ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ನನಗೆ ಅಧಿಕಾರ ಸಿಕ್ಕರೆ ಅದು ಕೇವಲ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ನನ್ನ ಪಾಲಿಗೆ ಗೌರವ ಅಥವಾ ಸ್ಥಾನಮಾನವಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.