ಡಿ.ಕೆ.ಶಿವಕುಮಾರ್ ಸಿಎಂ - ಅವಿಭಜಿತ ದಕ ಜಿಲ್ಲೆಗೆ ರಾಜಕೀಯ ದಿಕ್ಸೂಚಿ - ಕೃಷ್ಣಮೂರ್ತಿ ಆಚಾರ್ಯ



 ಉಡುಪಿ: ಕಾಂಗ್ರೆಸ್ ಪಕ್ಷದ ಅಜಾತಶತ್ರು ನಾಯಕ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಮೂಲಕ ಕರ್ನಾಟಕದಲ್ಲಿ ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯುವಜನತೆಯಲ್ಲಿ ಹೊಸ ಹುರುಪಿನ ಅಲೆ ಎದ್ದಿದೆ. ಇದು ಎರಡೂ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.

 ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಸರಿಸಾಟಿ ಇಲ್ಲದಂತೆ ಸಂಘಟಿಸಿ, ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರು ಇದೀಗ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ಪುನಃರಚಿಸಿ ರಾಜ್ಯಕ್ಕೆ ಹೊಸ ಯೋಜನೆಗಳನ್ನು ನೀಡುವ ನಿರೀಕ್ಷೆ ಇದೆ. 

  ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಸುಭದ್ರ ಅಡಿಪಾಯ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಮ್ಮ ನೇರ ಮತ್ತು ದಿಟ್ಟ ಆಡಳಿತದ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ಸಾಧಿಸಲಿದ್ದಾರೆ ಎಂದು ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.

  ಡಿ.ಕೆ. ಶಿವಕುಮಾರ್ ಅವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದಾಗಲೆಲ್ಲಾ ಇಲ್ಲಿನ ಯುವಜನತೆಗೆ ಇಲ್ಲಿಯೇ ಉದ್ಯೋಗ ನೀಡುವುದಕ್ಕಾಗಿ ಬೃಹತ್ ಉದ್ಯಮಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ, ಅದಕ್ಕೀಗ ಕಾಲ ಕೂಡಿ ಬಂದಿದೆ ಎಂದವರು ಭರವಸೆ ವ್ಯಕ್ತಪಡಿಸಿದ್ದಾರೆ.

  ಪ್ರಮಾಣವಚನ ನೇರಪ್ರಸಾರ

  ನಾಳೆ (ಜೂ.3)ರಂದು ನಡೆಯುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ಉಡುಪಿಯ ಜನತೆ ನೇರ ವೀಕ್ಷಿಸುವುದಕ್ಕಾಗಿ ನಗರದ ಕಿನ್ನಿಮುಲ್ಕಿ ಜಂಕ್ಷನ್‌ನಲ್ಲಿ ಬೃಹತ್ ಎಲ್‌ಇಡಿ ಪರದೆಯನ್ನು ವ್ಯವಸ್ಥೆ ಮಾಡಲಾಗುತ್ತದೆ ಮತ್ತು ನಗರದಲ್ಲಿ 25 ಸಾವಿರ ಮಂದಿಗೆ ಸಿಹಿತಿಂಡಿ ವಿತರಿಸಿ ಅಭಿನಂದನೋತ್ಸವ ನಡೆಸಲಾಗುತ್ತದೆ ಎಂದು ಕೃಷ್ಣಮೂರ್ತಿ ಆಚಾರ್ಯರು ತಿಳಿಸಿದ್ದಾರೆ.

  ಅಲ್ಲದೇ ಅಂದು ಬೆಳಿಗ್ಗೆ ಉಡುಪಿ ನಗರದ ಮತ್ತು ಸುತ್ತಮುತ್ತಲಿನ ಎಲ್ಲಾ ವಿಶೇಷ ಮಕ್ಕಳ ಶಾಲೆಗಳಿಗೆ ಹಾಗೂ ಅನಾಥಾಶ್ರಮ - ವೃದ್ಧಾಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

  ಅಮ್ಮನಿಗೆ ಹೂವಿನ ಪೂಜೆ

  ಕಳೆದ ವಿಧಾನಸಭಾ ಚುನಾವಣೆಗೆ ಮೊದಲು ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ 135 ಸೀಟುಗಳನ್ನು ಗೆಲ್ಲುವುದಾಗಿ ಹೇಳಿದ್ದರು, ಅದು ಸತ್ಯವಾಗಿತ್ತು.

  ಚುನಾವಣೆಯಲ್ಲಿ ಗೆದ್ದ ಮೇಲೆ ಕಳೆದ ವರ್ಷ ಪ್ರಥಮ ಬಾರಿಗೆ ಉಡುಪಿಗೆ ಕನ್ನರ್ಪಾಡಿ ಗಣೇಶೋತ್ಸವಕ್ಕೆ ಬಂದಿದ್ದ ಡಿ.ಕೆ.ಶಿವಕುಮಾರ್ ಅವರು ಮುಂದಿನ ಗಣೇಶೋತ್ಸವದೊಳಗೆ ಮುಖ್ಯಮಂತ್ರಿಯಾಗಿ ಉಡುಪಿಗೆ ಬರುವಂತಾಗಬೇಕು ಎಂದು ಕೃಷ್ಣಮೂರ್ತಿ ಆಚಾರ್ಯರು ಅಮ್ಮನಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದ್ದರು. ಅದೀಗ ಸತ್ಯವಾಗಿದೆ.

 ಈ ಹಿನ್ನೆಲೆಯಲ್ಲಿ ಜೂ. 3ರಂದು ಕನ್ನರ್ಪಾಡಿ ಅಮ್ಮನಿಗೆ ವಿಶೇಷ ಹೂವಿನ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಕೃಷ್ಣಮೂರ್ತಿ ಆಚಾರ್ಯರು ತಿಳಿಸಿದ್ದಾರೆ.