ಉಡುಪಿ: ಕೃಷ್ಣಮಠ ಪಾರ್ಕಿಂಗ್ ಏರಿಯಾದಲ್ಲಿ ಮಾರಾಮಾರಿ: ದೂರು ಪ್ರತಿದೂರು

 




ಉಡುಪಿ: ನಗರದ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ವ್ಯಕ್ತಿ ಹಾಗೂ ಆಂಧ್ರಪ್ರದೇಶ ಮೂಲದ ಪ್ರವಾಸಿಗರ ನಡುವೆ ಗಲಾಟೆ ನಡೆದು, ಉಭಯ ಕಡೆಯಿಂದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೈದರಾಬಾದ್ ಮೂಲದ ಪವನ್ ಅವರು ನೀಡಿದ ದೂರಿನ ಪ್ರಕಾರ, ಕುಟುಂಬದೊಂದಿಗೆ ಶ್ರೀ ಕೃಷ್ಣ ಮಠಕ್ಕೆ ದರ್ಶನಕ್ಕೆ ಬಂದಿದ್ದ ವೇಳೆ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ಚಲಾಯಿಸುವ ವಿಚಾರವಾಗಿ ಸ್ಥಳೀಯ ನಿವಾಸಿ ಸುಪ್ರೀತ್ ಅವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸುಪ್ರೀತ್ ಅವರು ಕಾರನ್ನು ಪ್ರವಾಸಿಗರ ಕಡೆಗೆ ಚಲಾಯಿಸಲು ಯತ್ನಿಸಿದ್ದು, ಬಳಿಕ ಕಾರಿನಲ್ಲಿದ್ದ ಕಂಬಳದ ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದಕ್ಕೆ ಪ್ರತಿಯಾಗಿ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಅವರು ಕೂಡ ದೂರು ನೀಡಿದ್ದು, ತಾವು ಪತ್ನಿ ಹಾಗೂ ಮಗುವಿನೊಂದಿಗೆ ಬರುತ್ತಿದ್ದ ವೇಳೆ ಪ್ರವಾಸಿಗರು ನಿಧಾನವಾಗಿ ವಾಹನ ಚಲಾಯಿಸುವಂತೆ ಹೇಳಿ ಅನಗತ್ಯವಾಗಿ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ತಮ್ಮ ಕಾರಿನ ಗಾಜು ಜಖಂಗೊಳಿಸಿದ್ದು, ಚೇರ್‌ಗಳಿಂದ ಹಲ್ಲೆ ನಡೆಸಿದ ಪರಿಣಾಮ ಬಾಯಿಯಿಂದ ರಕ್ತಸ್ರಾವ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಉಭಯ ಕಡೆಯ ದೂರುಗಳನ್ನು ದಾಖಲಿಸಿಕೊಂಡಿರುವ ಉಡುಪಿ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.