ರಾಮ ಮಂದಿರ ಹುಂಡಿ ಹಗರಣ : ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ – ವಿನಯಕುಮಾರ್ ಸೊರಕೆ ಆಗ್ರಹ


 

ಉಡುಪಿ: ರಾಮ ಮಂದಿರ ದೇಣಿಗೆ ಮತ್ತು ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು.



ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರನ್ನು ಬಳಸಿಕೊಂಡು ಬಿಜೆಪಿ ಚುನಾವಣೆಗಳನ್ನು ಎದುರಿಸಿದ್ದು, ಮನೆ ಮನೆಗೆ ಇಟ್ಟಿಗೆ ನೀಡಿ ಪೂಜೆ ಮಾಡಿಸಿ ಮತ ಯಾಚನೆ ನಡೆಸಲಾಗಿದೆ. ರಾಮ ಮಂದಿರಕ್ಕಾಗಿ ದಶಕಗಳಿಂದ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಪತ್ರ ಸಾರ್ವಜನಿಕರಿಗೆ ಲಭ್ಯವಿಲ್ಲ.

ಮಂದಿರ ನಿರ್ಮಾಣದ ವೇಳೆ ರಿಯಲ್ ಎಸ್ಟೇಟ್ ವ್ಯವಹಾರ ನಡೆದಿರುವ ಆರೋಪಗಳಿದ್ದು, ಟ್ರಸ್ಟ್ ಸದಸ್ಯರು ಇದಕ್ಕೆ ಉತ್ತರಿಸಬೇಕಾಗಿದೆ. ಕರ್ನಾಟಕದ ಟ್ರಸ್ಟಿಯೊಬ್ಬರ ಅಳಿಯನಿಗೆ ನಿರ್ಮಾಣ ಕಾಮಗಾರಿಯಲ್ಲಿ ಅವಕಾಶ ನೀಡಲಾಗಿತ್ತು ಎಂಬ ಆರೋಪವೂ ಇದೆ ಎಂದು ಹೇಳಿದರು.

ರಾಮ ಮಂದಿರಕ್ಕೆ ಭಕ್ತರು ನೀಡಿದ ಚಿನ್ನವನ್ನು ಕರ್ನಾಟಕದಲ್ಲೇ ಕರಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮಾಹಿತಿ ಹಕ್ಕಿನ ಕಾಯ್ದೆಯ ವ್ಯಾಪ್ತಿಯಿಂದ ರಾಮ ಮಂದಿರವನ್ನು ಹೊರಗಿಡಲಾಗಿದೆ ಎಂದು ದೂರಿದರು. ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆದುಹಾಕಿರುವುದು ಹಾಗೂ ಮಂದಿರದ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗುವ ಸ್ಥಿತಿಯಲ್ಲಿವೆ ಎಂಬ ವರದಿಗಳ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಈ ಎಲ್ಲ ಆರೋಪಗಳ ಸತ್ಯಾಸತ್ಯತೆ ಹೊರಬರಬೇಕಾದರೆ ಎಸ್ಐಟಿ ತನಿಖೆ ಸಾಕಾಗುವುದಿಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು.ಭಕ್ತರ ಭಾವನೆಗೆ ಧಕ್ಕೆ ಉಂಟಾಗದಂತೆ ಪಾರದರ್ಶಕ ತನಿಖೆ ನಡೆಯಬೇಕು. ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಎಲ್ಲ ವಿಷಯಗಳ ಬಗ್ಗೆ ಮಾತನಾಡುತ್ತಾರೆ.ಆದರೆ ರಾಮಮಂದಿರ ಹಗರಣದ ಬಗ್ಗೆ ಮೌನ ವಹಿಸಿದ್ದಾರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ , ಕಾಪು ಬ್ಲಾಕ್ ಕಾಂಗ್ರೆಸ್ ( ದಕ್ಷಿಣ) ಸುಕುಮಾರ್ ವೈ ಉಪಸ್ಥಿತರಿದ್ದರು.