ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಬಂಧನ - ಪೊಲೀಸರ ಮೇಲೆ ಹಲ್ಲೆ; ಪಿಎಸ್ಐ ಆಯುಧ ಕಸಿದು ಫೈರ್ – ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು



ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್‌ನ ಮಾಲಕ ಡೇವಿಡ್ ಡಿಸೋಜಾ ಅವರನ್ನು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಮೂವರು ಶೂಟರ್‌ಗಳನ್ನು ಕಳುಹಿಸಿದ ಆರೋಪದ ಮೇಲೆ ಬಿಹಾರದ ಸಾರ್ಮರ್, ನಳಂದ ನಿವಾಸಿ ಕಮಲೇಶ್ವರ ಪಾಟೀಲ್ ಅವರ ಪುತ್ರ ಅನುಜ್ ಪಾಟೀಲ್‌ನನ್ನು ಸೋಮವಾರ ಬೆಳಗ್ಗೆ 6ರಿಂದ 6.30ರ ವೇಳೆಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕುಂದಾಪುರ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜ ನಾಯಕ್, ಕೊಲ್ಲೂರು ಠಾಣೆಯ ಪೊಲೀಸ್ ಉಪನಿರೀಕ್ಷಕ ವಿನಯ್ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಕರೆತರುತ್ತಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಕುಂದಾಪುರ ಠಾಣೆಯ ಪಿಎಸ್ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅನುಜ್ ಪಾಟೀಲ್‌ನನ್ನು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅನುಜ್ ಪಾಟೀಲ್ 2017ರಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಆರ್ಮ್ಸ್ ಆಕ್ಟ್‌ಗೆ ಸಂಬಂಧಿಸಿದ ಪ್ರಕರಣಗಳಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಮೂವರು ಶೂಟರ್‌ಗಳನ್ನು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಅನುಜ್ ಪಾಟೀಲ್‌ನ ಬಂಧನವು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.