ರಾಯಚೂರು ಜಿಲ್ಲೆಯಲ್ಲಿ ಶೌಚಕ್ಕೆಂದು ರಾತ್ರಿ ವೇಳೆ ಬಯಲಿಗೆ ತೆರಳಿದ ದಲಿತ ಮಹಿಳೆಯ ಮೇಲೆ ನಡೆದಿರುವ ಅಮಾನವೀಯ ಘಟನೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು ಅಸುರಕ್ಷಿತ ಪರಿಸ್ಥಿತಿಗೆ ಒಳಗಾಗುತ್ತಿರುವುದು ಆತಂಕಕಾರಿ. ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಮಹಿಳೆಯರ ಸುರಕ್ಷತೆ ಮತ್ತು ಗೌರವವನ್ನು ಖಾತ್ರಿಪಡಿಸಬೇಕು.
ಈ ಪ್ರಕರಣದಲ್ಲಿ ಸಂತ್ರಸ್ತೆ ಹಾಗೂ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ನೀಡಬೇಕು. ಪ್ರಕರಣದ ವಿಚಾರಣೆಯನ್ನು ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯದಲ್ಲಿ ತ್ವರಿತವಾಗಿ ನಡೆಸಿ, ಸಂತ್ರಸ್ತೆಗೆ ನ್ಯಾಯ ದೊರಕುವಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ರನ್ನು ನೇಮಕ ಮಾಡಬೇಕು. ತನಿಖೆಯು ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡವಿಲ್ಲದೆ ನಿಷ್ಪಕ್ಷಪಾತವಾಗಿ ನಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆ ಮತ್ತು ಅವರ ಕುಟುಂಬದ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
